ನಟ ಪುನೀತ್'ಗೆ ಇಂದು ಕರ್ನಾಟಕ ರತ್ನ: ವಿಧಾನಸೌಧದ ಬಳಿ ಹೆಚ್ಚಿದ ಭದ್ರತೆ, ಮಾರ್ಗ ಬದಲಾವಣೆ

 ನಾಡಿನಾದ್ಯಂತ ಮಂಗಳವಾರ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯೋತ್ಸವ ಸಂಭ್ರಮದ ವೇಳೆ ರಾಜ್ಯ ಸರ್ಕಾರ ರಾಜ್ಯದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರದಾನ ಮಾಡಲಿದೆ.

                   ವಿಧಾನಸೌಧ ಮುಂದೆ ನಡೆದಿರುವ ಸಕಲ ಸಿದ್ಧತೆ.

By : Rekha.M
Online Desk

ಬೆಂಗಳೂರು: ನಾಡಿನಾದ್ಯಂತ ಮಂಗಳವಾರ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯೋತ್ಸವ ಸಂಭ್ರಮದ ವೇಳೆ ರಾಜ್ಯ ಸರ್ಕಾರ ರಾಜ್ಯದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರದಾನ ಮಾಡಲಿದೆ.

ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭಕ್ಕೆ ತಮಿಳಿನ ನಟ ರಜನಿಕಾಂತ್ ಮತ್ತು ತೆಲುಗಿನ ಜ್ಯೂನಿಯ್ ಎನ್'ಟಿಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಲಿದ್ದಾರೆ. ಇನ್ನು ರಾಜ್ಯದಿಂದಲೂ ಒಬ್ಬರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ಫೋಸಿಸ್ ಫೌಂಡೇಷನ್'ನ ಮುಖ್ಯಸ್ಥರಾದ ಸುಧಾಮೂರ್ತಿಯವರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೆ, ನಟ ಡಾ.ರಾಜ್ ಕುಮಾರ್ ಅವರ ಕುಟುಂಬದ 50 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಸಂಚಾರ ದಟ್ಟಣೆ ಸಾಧ್ಯತೆ ಹಿನ್ನಲೆ ವಿಧಾನಸೌಧ ಬಳಿ ಮಾರ್ಗ ಬದಲಾವಣೆ
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ವಿಧಾನಸೌಧದ ಆವರಣದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧದ ಬಳಿ ಮಾರ್ಗ ಬದಲಾವಣೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು ಬದಲಿ ಮಾರ್ಗಗಳ ಮೂಲಕ ಸಂಚರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

‘ವಿಧಾನಸೌಧ ಬಳಿಯ ಮೀಸೆ ತಿಮ್ಮಯ್ಯ ವೃತ್ತದಿಂದ ಕೆ.ಆರ್.ವೃತ್ತದವರೆಗೆ ಹೆಚ್ಚು ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು, ಜನರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ಬಿಎಂಟಿಸಿ ಬಸ್ ಹಾಗೂ ಮೆಟ್ರೊ ಹೆಚ್ಚು ಬಳಸಬೇಕು ಎಂದು ತಿಳಿಸಿದ್ದಾರೆ.

‘ಇನ್‌ಫೆಂಟ್ರಿ ರಸ್ತೆ, ಅಲಿ ಅಸ್ಕರ್ ರಸ್ತೆ, ಅರಮನೆ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಕನ್ನಿಂಗ್‌ಹ್ಯಾಮ್ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನೂ ನಿಷೇಧಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


    Post a Comment

    أحدث أقدم