ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

 ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಲೋಕಾರ್ಪಣೆ ಮಾಡಿದ್ದಾರೆ.

                                                                     ಸಿಎಂ ಬೊಮ್ಮಾಯಿ
By :Rekha.M
Online Desk

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಲೋಕಾರ್ಪಣೆ ಮಾಡಿದ್ದಾರೆ.

ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್. ಸಹಯೋಗದೊಂದಿಗೆ ರಾಜಹಂಸಗಡದ ಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಮುಖ್ಯಮಂತ್ರಿಗಳು ಶಿವಾಜಿ ಪ್ರತಿಮೆಯ್ನು ಅನಾವರಣಗೊಳಿಸಿದರು.

ಶಿವಾಜಿ ಪ್ರತಿಮೆ ಅನಾವರಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಂಘರ್ಷದ ಕಿಡಿ ಹೊತ್ತಿಸಿದ್ದು, ಇದರ ನಡುವಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ.

ನಾಲ್ಕೂವರೆ ಕೋಟಿ ವೆಚ್ಚದಲ್ಲಿ ರಾಜಹಂಸಗಡ ಕೋಟೆ ಅಭಿವೃದ್ಧಿ ಮಾಡಲಾಗಿದ್ದು, ಇದರ ಭಾಗವಾಗಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಯನ್ನೂ ಸ್ಥಾಪನೆ ಮಾಡಲಾಗಿದೆ.

ಈ ಪ್ರತಿಮೆ ಲೋಕಾರ್ಪಣೆಗೆ ಮಾರ್ಚ್ 5ರ ಮುಹೂರ್ತವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಫಿಕ್ಸ್ ಮಾಡಿದ್ದರು. ಆದರೆ, ಇದಕ್ಕೂ ಮುನ್ನವೇ ಪ್ರತಿಮೆಯನ್ನು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೊಳಿಸುವುದಾಗಿ ರಮೇಶ್ ಜಾರಕಿಹೊಳಿಯವರು ಹೇಳಿದ್ದರು.

ಈ ನಡುವೆ ಶಿವಾಜಿ ಪ್ರತಿಮೆ ಅನಾವರಣ ಫೈಟ್​ನಲ್ಲಿ ನಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂಜು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತರೊಬ್ಬರು ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆಂದು ಹೇಳಲಾಗುತ್ತಿದ್ದು, ಈ ಕುರಿತು ಆಡಿಯೊಂದು ವೈರಲ್ ಆಗಿದೆ ಎನ್ನಲಾಗುತ್ತಿದೆ.

ಈ ಆಡಿಯೋ ಸಂಬಂಧ ಗ್ರಾಮಸ್ಥರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೀವ‌ ಬೆದರಿಕೆ ಹಾಕಿದವನನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ದಿಢೀರ್ ಪ್ರತಿಭಟನೆಯಿಂದ 1 ಗಂಟೆ ಕಾಲ ಕಾರಿನಲ್ಲಿಯೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಲಾಕ್ ಆಗಿದ್ದರು ಎನ್ನಲಾಗಿದೆ. ರಾಜಹಂಸಗಡ ಕೋಟೆ ಆವರಣದಲ್ಲಿ‌ ಮೊನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.


Post a Comment

Previous Post Next Post